ಹರಪನಹಳ್ಳಿ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಬಲಹೀನಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಮಸೂದೆ ತಕ್ಷಣವೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಸಿಪಿಐ(ಎಂಎಲ್) ಲಿಬರೇಷನ್ ಹಾಗೂ ಅಖಿಲ ಭಾರತ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಯಿತು.
ನಗರದ ತಾಲ್ಲೂಕು ಆಡಳಿತ ಸೌಧದಲ್ಲಿ ಜಮಾಯಿಸಿದ ಕಾರ್ಮಿಕರು ಹಾಗೂ ಸಂಘಟನೆಯ ಮುಖಂಡರು, ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಿಪಿಐ(ಎಂಎಲ್) ಲಿಬರೇಷನ್ ರಾಜ್ಯ ಕಾರ್ಯದರ್ಶಿ ಎಸ್. ಪರಶುರಾಮ ಮಾತನಾಡಿ, ಕೇಂದ್ರ ಸರ್ಕಾರವು ಬಡವರಿಗೆ ಆಸರೆಯಾಗಿದ್ದ ಉದ್ಯೋಗ ಖಾತ್ರಿ ಯೋಜನೆಯನ್ನು ಬದಲಾಯಿಸಿ, ಹೊಸದಾಗಿ ‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ – 2025 ಜಾರಿಗೆ ತಂದಿದೆ. ಡಿಸೆಂಬರ್ನಲ್ಲಿ ಸಂಸತ್ತಿನಲ್ಲಿ ಅಂಗೀಕಾರವಾಗಿರುವ ಈ ಮಸೂದೆಯು ದೇಶದ ಬಡ ಮತ್ತು ಮಧ್ಯಮ ವರ್ಗದವರ ಉದ್ಯೋಗದ ಹಕ್ಕನ್ನು ಕಸಿದುಕೊಂಡಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಮಹಾತ್ಮ ಗಾಂಧೀಜಿಯವರ ಹೆಸರನ್ನು ಕೈಬಿಟ್ಟಿರುವುದು ಖಂಡನೀಯ. ಕೂಡಲೇ ಹಳೆಯ ಹೆಸರಿನಲ್ಲಿಯೇ ಯೋಜನೆ ಯಥಾವತ್ತಾಗಿ ಮುಂದುವರಿಸಬೇಕು. 2025-26ನೇ ಸಾಲಿನಲ್ಲಿ ಈ ಯೋಜನೆಗೆ ರೂ. 86,000 ಕೋಟಿ ಮೀಸಲಿಡಲಾಗಿತ್ತು. ಮುಂಬರುವ 2026-27ನೇ ಸಾಲಿನ ಬಜೆಟ್ನಲ್ಲಿ ಈ ಮೊತ್ತವನ್ನು ಕನಿಷ್ಠ ರೂ. 2 ಲಕ್ಷ ಕೋಟಿಗೆ ಹೆಚ್ಚಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಜಿಲ್ಲಾ ಕಾರ್ಯದರ್ಶಿ ಹುಲಿಕಟ್ಟಿ ಮೈಲಪ್ಪ, ತಾಲ್ಲೂಕು ಕಾರ್ಯದರ್ಶಿ ಮಂಗಳಮ್ಮ, ಮುಖಂಡರಾದ ಸಂದೇರ ಪರಶುರಾಮ, ನಾರಾಯಣಪುರ ಅಂಜಿನಮ್ಮ, ಸುಧಾ, ರಫಿ, ಮೋಹನ್ ಕುಮಾರ, ಅಂಜಿನಮ್ಮ, ತಿಲಕ್ ಕುಮಾರ, ಪ್ರವೀಣ್ ಸವಿತಾ ಯಶೋದಮ್ಮ, ಗೀತಮ್ಮ, ಈರಮ್ಮ, ರೇಣುಕಮ್ಮ, ಹನುಮಕ್ಕ, ಸಣ್ಣ ಕರಿಬಸಪ್ಪ, ಶೇಖಮ್ಮ ಇದ್ದರು.
Leave a comment