ವಿಜಯನಗರ (ಹೊಸಪೇಟೆ) : ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮರಣ ಹೊಂದಿದ ಫಲಾನುಭವಿಗಳನ್ನು ಪತ್ತೆ ಹಚ್ಚಿ, ಅವರ ಖಾತೆಗಳಿಗೆ ನಿಯಮಾನುಸಾರ ಜಮೆಯಾಗಿರುವ ಅನುದಾನವನ್ನು ತಕ್ಷಣವೇ ತಡೆಯಲು ಕ್ರಮ ವಹಿಸಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಕೆ ಶಿವಮೂರ್ತಿ ಹೇಳಿದರು.
ಜಿಲ್ಲಾ ಪಂಚಾಯತಿ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಹಯೋಗದೊಂದಿಗೆ ಬುಧವಾರ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗೃಹಲಕ್ಷ್ಮಿ ಹಣವನ್ನು ಸರ್ಕಾರಕ್ಕೆ ಮರುಪಾವತಿಸಲು ವಿವಿಧ ಇಲಾಖೆಗಳು ಪರಸ್ಪರ ಸಮನ್ವಯ ಸಾಧಿಸಬೇಕು.
ಗೃಹಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ ಅರ್ಹ ಫಲಾನುಭವಿಗಳ ಮರು ಸಮೀಕ್ಷೆ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪರಿಶೀಲನಾ ಸಭೆಯಲ್ಲಿ ಮರು ಸಮೀಕ್ಷೆಯ ಅರ್ಜಿ ಬಿಡುಗಡೆಗೊಳಿಸಿದ ಅವರು, ಈ ಕಾರ್ಯವನ್ನು ಪಾರದರ್ಶಕವಾಗಿ ನಡೆಸಬೇಕು ಎಂದು ಸಂಬಂದಿತ ಅಧಿಕಾರಿಗಳಿಗೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ 3 ವರ್ಷಗಳನ್ನು ಪೂರ್ಣಗೊಳಿಸಿದ ನೆನಪಿಗಾಗಿ ಜಿಲ್ಲಾ ಪಂಚಾಯತಿ ಆವರಣದಲ್ಲಿ ಸಸಿ ನೆಡಲಾಯಿತು. ಸಭೆಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಕೆ.ಬದಾವಲಿ, ಚಂದ್ರಪ್ಪ ಹುಲಿಕಟ್ಟೆ, ಕೆ. ಎಸ್.ಶಾಂತನಗೌಡ, ಹೆಚ್ ಜಾಂಡಿಸಾಹೇಬ್, ಜಿ. ಪಂ. ಮುಖ್ಯ ಯೋಜನಾಧಿಕಾರಿ ಅನ್ನದಾಸ್ವಾಮಿ, ವಿವಿಧ ತಾಲ್ಲೂಕಿನ ಅನುಷ್ಠಾನ ಸಮಿತಿ ಅಧ್ಯಕ್ಷರು, ಸದಸ್ಯರು ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು
Leave a comment