ಹರಪನಹಳ್ಳಿ: ಪ್ರಸಕ್ತ ಮುಂಗಾರು ಮಳೆ ಕೈಕೊಟ್ಟಿರುವ ಕಾರಣ ಜಿಲ್ಲೆಯಲ್ಲಿ ಸಾವಿರಾರು ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ. ಈ ಕುರಿತು ಸಮೀಕ್ಷೆ ನಡೆಸಿ ಕೂಡಲೇ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬೆಳೆ ವಿಮೆಗೆ ಅರ್ಜಿ ಸಲ್ಲಿಸಿದ ಹಾಗೂ ಸಲ್ಲಿಸದ ಎಲ್ಲ ರೈತರಿಗೂ ಪರಿಹಾರ ದೊರಕಿಸುತ್ತೇವೆ ಎಂದು ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ತಿಳಿಸಿದರು.
ತಾಲ್ಲೂಕಿನ ನಿಲುವಂಜಿ ಗ್ರಾಮಕ್ಕೆ ಶುಕ್ರವಾರ ಭೇಟಿ ನೀಡಿ ಮಳೆಯಿಲ್ಲದೆ ಹಾನಿಗೊಳಗಾದ ಬೆಳೆಗಳ ಸಮೀಕ್ಷೆ ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ನಾನು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವನಾಗಲಿ ಅಥವಾ ಬಿಡಲಿ, ನವೆಂಬರ್ ತಿಂಗಳಲ್ಲಿಯೇ ಹಂಪಿ ಉತ್ಸವವನ್ನು ಆಯೋಜಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಹಂಪಿ ಉತ್ಸವದಲ್ಲಿ ಘೋಷಣೆ ಮಾಡಿರುವಂತೆ, ಈ ವರ್ಷ ಉತ್ಸವ ನಡೆಯುತ್ತದೆ.
ಸಾಮಾನ್ಯ ಪೌರಕಾರ್ಮಿಕರ ಮಗನಾದ ಬಸವಂತಪ್ಪ ಅವರನ್ನು ಸಚಿವರನ್ನಾಗಿ ಮಾಡಿದ್ದು ಕಾಂಗ್ರೆಸ್ ಪಕ್ಷ ಮಾತ್ರ ಎಂದು ಸಮರ್ಥಿಸಿಕೊಂಡರು. ಪೇಮೆಂಟ್ ಸಿಸ್ಟಮ್ ಕಾಂಗ್ರೆಸ್ ಪಕ್ಷದ್ದಲ್ಲ, ಅದು ಬಿಜೆಪಿಯಲ್ಲಿದೆ ಎಂದು ಸಚಿವ ಆರ್.ಬಿ. ತಿಮ್ಮಾಪುರ ಅವರ ಆಡಿಯೊಕ್ಕೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಅವರು, ತಮ್ಮ ಮೇಲೂ ಹಿಂದೆ ಪಿತೂರಿ ನಡೆಸಿದ್ದರು. ಪಿತೂರಿ ಮಾಡಿದವರು ಯಾರು ಎಂಬುದು ನನಗೆ ಮುಖ್ಯವಲ್ಲ. ಇಂತಹ ರಾಜಕೀಯ ಪಿತೂರಿಗಳು ಕೇವಲ ಕಾಂಗ್ರೆಸ್ಗೆ ಮಾತ್ರ ಸೀಮಿತವಲ್ಲ, ಎಲ್ಲ ರಾಜಕೀಯ ಪಕ್ಷಗಳಲ್ಲೂ ಇವೆ. ನಮ್ಮ ವಿರುದ್ಧ ಪಿತೂರಿ ಮಾಡಿದವರಿಗೂ ಭಗವಂತ ಒಳ್ಳೆಯದು ಮಾಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.
ಮೈಸೂರು ಜಿಲ್ಲೆಯ ದೃಷ್ಟಿಯಿಂದ ಮಾತ್ರ ಸಚಿವ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಜಮೀರ್ ಹೆಸರು ಪ್ರಸ್ತಾಪಿಲ್ಲ ಎಂದು ಯತೀಂದ್ರ ಹೇಳಿಕೆ ನೀಡಿದ್ದಾರೆ ಅಷ್ಟೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ತಕ್ಷಣವೇ ಸಿದ್ದರಾಮಯ್ಯ ಅವರ ಆಶೀರ್ವಾದ ಪಡೆದಿದ್ದೇನೆ. ಮಾಜಿ ಮುಖ್ಯಮಂತ್ರಿಗಳಿಗೂ ಮತ್ತು ನಮಗೂ ಉತ್ತಮ ಬಾಂಧವ್ಯವಿದೆ ಎಂದು ತಿಳಿಸಿದರು.
ಹಿಂದೆ ವಸತಿ ಸಚಿವನಾಗಿದ್ದಾಗ 79 ಸಾವಿರ ಮನೆಗಳನ್ನು ಮಂಜೂರು ಮಾಡಿದ್ದೆ, ಪ್ರಸ್ತುತ 39 ಸಾವಿರ ಮನೆಗಳ ನಿರ್ಮಾಣ ಬಾಕಿ ಉಳಿದಿದೆ. ಹಾಗಾಗಿ ನನಗೆ ವಸತಿ ಖಾತೆಯನ್ನೇ ಮರುಹಂಚಿಕೆ ಮಾಡುವಂತೆ ಮನವಿ ಮಾಡಿದ್ದೇನೆ. ಮುಖ್ಯಮಂತ್ರಿಗಳು ಯಾವ ಖಾತೆ ನೀಡಿದರೂ ಅದನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದರು. ಸಚಿವ ಸ್ಥಾನ ಹಂಚಿಕೆಯಲ್ಲಿ ಸಿದ್ದರಾಮಯ್ಯ ಅವರನ್ನು ಕಡೆಗಣಿಸಿಲ್ಲ. ಅಹಿಂದ ನಾಯಕರನ್ನು ಪರಿಗಣಿಸಲಾಗಿದೆ.
ಎಂಎಲ್ಸಿ ಆಗಿರುವ ಓರ್ವ ಮಹಿಳೆಗೆ ಸಚಿವ ಸ್ಥಾನ ಸಿಗಬೇಕಿತ್ತು, ಆದರೆ ಕಾರಣಾಂತರಗಳಿಂದ ಅದು ತಾತ್ಕಾಲಿಕವಾಗಿ ತಡೆಯಾಗಿದೆ. ಇನ್ನೆರಡು ದಿನಗಳಲ್ಲಿ ಹೈಕಮಾಂಡ್ ಆ ಗೊಂದಲವನ್ನು ಸರಿಪಡಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಹರಪನಹಳ್ಳಿ ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Leave a comment