Home ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

Share
Share
ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ
ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಇತ್ತು. ಇದನ್ನು ಮನಗಂಡು ಸರ್ಕಾರದ ಮಹತ್ವಾಕಾಂಕ್ಷೆಯ ‘ಪ್ರಜಾಸೇವೆ’ ಇಲಾಖೆ ಸ್ಥಾಪನೆ ಮಾಡಿ ಜಾರಿಗೊಳಿಸಲಾಗಿದೆ.  ಇಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು  ಸಕಾಲದಲ್ಲಿ ಇತ್ಯರ್ಥವಾಗಬೇಕು ಎಂದು ಮುಜರಾಯಿ, ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಬಸವಂತಪ್ಪ ಹೇಳಿದರು.
ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದ ವತಿಯಿಂದ ಹರಪನಹಳ್ಳಿ ತಾಲೂಕಿನ ಹೊಸಪೇಟೆ ರಸ್ತೆಯಲ್ಲಿರುವ ಡಾ. ಬಾಬು ಜಗಜೀವನ ರಾಂ ಸಮುದಾಯ ಭವನದಲ್ಲಿ ಶನಿವಾರ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರಜಾಸೇವ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪ್ರಜಾ ಸೇವೆ ಆಂದೋಲನವು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಆಗಿದ್ದು, ಪ್ರಜಾ ಸೇವೆ ಇಲಾಖೆಯಡಿ ನೋಂದಣಿ ಆಗುವ ಅಹವಾಲುಗಳನ್ನು ಸೂಕ್ತ ರೀತಿಯಲ್ಲಿ ಪರಿಶೀಲಿಸಿ ಮತ್ತು ನಿಯಮಾನುಸಾರ ಸಕಾಲದಲ್ಲಿ ಪರಿಹರಿಸಿ ಕ್ರಮ ಕೈಗೊಳ್ಳಬೇಕು.

ಸಾರ್ವಜನಿಕರು ಸಲ್ಲಿಸುವ ಅರ್ಜಿಗಳು ಸ್ಥಳದಲ್ಲಿಯೇ ಪರಿಹರಿಸಬಹುದಾದ ಸಮಸ್ಯೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ತಕ್ಷಣವೇ ಪರಿಹಾರ ನೀಡಲಾಗುವುದು. ಕಾನೂನಿನ ತೊಡಕುಗಳು ಅಥವಾ ಇತರೆ ನ್ಯೂನತೆಗಳಿದ್ದರೆ, ಅವುಗಳನ್ನು ಸರಿಪಡಿಸಲು ಸೂಕ್ತ ಸಮಯಾವಕಾಶ ನೀಡಿ ಪರಿಹಾರ ಕಲ್ಪಿಸಬೇಕು. ತಕ್ಷಣ ಪರಿಹರಿಸಲು ಸಾಧ್ಯವಾಗದ ಪ್ರಕರಣಗಳಲ್ಲಿ ಸೂಕ್ತ ಸಲಹೆ, ಮಾರ್ಗದರ್ಶನ ಹಾಗೂ ಮುಂದಿನ ಕ್ರಮದ ಕುರಿತು ಸ್ಪಷ್ಟ ಮಾಹಿತಿ ನೀಡಬೇಕು ಎಂದರು.

ಅಧಿಕಾರಿಗಳು ಸಾರ್ವಜನಿಕರ ಅಹವಾಲುಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು. ಜನರನ್ನು ಕಚೇರಿಯಿಂದ ಕಚೇರಿಗೆ ಅಲೆದಾಡಿಸುವ ಅಥವಾ ಅರ್ಜಿಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ನೊಂದ ಜನರಿಗೆ ತಮ್ಮ ಸಮಸ್ಯೆಗೆ ಪರಿಹಾರ ದೊರೆತಿದೆ ಎಂಬ ಸಕಾರಾತ್ಮಕ ಸಂದೇಶ ಕಾರ್ಯಕ್ರಮದ ಮೂಲಕ ರವಾನೆಯಾಗಬೇಕು. ರೈತರು, ಬಡವರು ಹಾಗೂ ಕೂಲಿ ಕಾರ್ಮಿಕರು ತಮ್ಮ ಸಮಸ್ಯೆಗಳಿಗಾಗಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸರ್ಕಾರವೇ ಜನರ ಮನೆಬಾಗಿಲಿಗೆ ತೆರಳಿ ಸಮಸ್ಯೆ ಆಲಿಸಿ, ಪರಿಹಾರ ಕಲ್ಪಿಸುವ ವಾತಾವರಣ ನಿರ್ಮಿಸುವುದು, ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.

ಸ್ಥಳದಲ್ಲೇ ಹಲವು ಅಹವಾಲುಗಳಿಗೆ ಸ್ಪಂದನೆ : ಕಾರ್ಯಕ್ರಮದಲ್ಲಿ ಸಾರ್ವಜನಿಕರು ವಿವಿಧ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದರು. ಮನೆಯ ಪಕ್ಕದಲ್ಲೇ ವಿದ್ಯುತ್ ಪರಿವರ್ತಕ ಅಳವಡಿಸಿರುವುದರಿಂದ ತೊಂದರೆಯಾಗುತ್ತಿದೆ ಎಂದು ವ್ಯಕ್ತಿಯೊಬ್ಬರು ಮನವಿ ಸಲ್ಲಿಸಿದಾಗ, ಅದನ್ನು ಪರಿಶೀಲಿಸಿ ತೆರವುಗೊಳಿಸಲು ಸಚಿವರು ಸೂಚಿಸಿದರು.

ಹಿರಿಯರು ತಮಗಾಗಿ ವಿಲ್ ಬರೆದಿಡಲಾಗಿದೆ. ಅದರನ್ವಯ ಆಸ್ತಿ ಪರಭಾರೆ ಮಾಡಿ ಕೊಡದೇ ಕೆಲವು ವ್ಯಕ್ತಿಗಳ ಒತ್ತಡಕ್ಕೆ ಮಣಿದು ನಕಲು ಮಾಡಿ ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ, ಹಾಗೂ ಆಸ್ತಿಯನ್ನು ಪರಭಾರೆ ಮಾಡಿಕೊಡಲು ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ ಎಂದು ಮತ್ತೊಂದು ಅಹವಾಲು ಸಲ್ಲಿಸಿ ನ್ಯಾಯ ಒದಗಿಸುವಂತೆ ಮನವಿ ಮಾಡಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ತ್ವರಿತವಾಗಿ ಪರಿಶೀಲಿಸಿ ಕಾನೂನು ಬದ್ದವಾಗಿದ್ದಲ್ಲಿ ಶೀಘ್ರವೇ ಸಮಸ್ಯೆ ಬಗೆಹರಿಸಬೇಕು. ಇಲ್ಲಾವಾದಲ್ಲಿ ಸೂಕ್ತ ಕಾರಣ ತಿಳಿಸಿ ಹಿಂಬರಹ ನೀಡಬೇಕು ಎಂದು ತಹಶೀಲ್ದಾರ್ ಅವರಿಗೆ ನಿರ್ದೇಶನ ನೀಡಿದರು.

ಬೆಣ್ಣಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಶೇಷಚೇತನ ವ್ಯಕ್ತಿಯೊಬ್ಬರಿಗೆ ಪಿಂಚಣಿ ನೀಡಲಾಗುತ್ತಿತ್ತು. ಆದರೆ ಅಧಿಕಾರಿಗಳ ಎಡವಟ್ಟಿನಿಂದ ಬದುಕಿದ್ದರೂ ಮರಣ ಹೊಂದಿದ್ದಾರೆ ಎಂದು ತಮ್ಮ ಆನ್‌ಲೈನ್ ತಂತ್ರಾಂಶದಲ್ಲಿ ನಮೂದಿಸಲಾಗಿದೆ. ಆದ್ದರಿಂದ ಅಂಗವಿಕಲರಾಗಿದ್ದರೂ ಪಿಂಚಣಿ ಬರುತ್ತಿಲ್ಲ ಎಂದು ಫಲಾನುಭವಿಯೊಬ್ಬರು ಅಳಲು ತೋಡಿಕೊಂಡರು. ಈ ಪ್ರಕರಣದಲ್ಲಿ ಈ ಹಿಂದೆ ಕಾರ್ಯನಿರ್ವಹಿಸಿದ್ದ ಅಧಿಕಾರಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಚಿವರು ಸೂಚಿಸಿದರು. ಇದೇ ವೇಳೆ, ತಮ್ಮ ಪೂರ್ವಜರ ಕಾಲದಿಂದ ಸುಮಾರು 70–80 ವರ್ಷಗಳಿಂದ ಉಳುಮೆ ಮಾಡಿಕೊಂಡು ಬರುತ್ತಿರುವ ಜಮೀನನ್ನು ಅರಣ್ಯ ಇಲಾಖೆ ವಶಪಡಿಸಿಕೊಂಡಿದೆ ಎಂದು ರೈತರು ಅಹವಾಲು ಸಲ್ಲಿಸಿ, ಜಮೀನಿನ ಹಕ್ಕು ಹಾಗೂ ಸಮಸ್ಯೆಗೆ ನ್ಯಾಯ ಒದಗಿಸುವಂತೆ ಮನವಿ ಮಾಡಿದರು.

ವಿವಿಧ ಇಲಾಖೆಗಳಿಂದ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ: ಹರಪನಹಳ್ಳಿ ತಾಲೂಕು ಮಟ್ಟದ ಪ್ರಜಾ ಸೇವೆ ಆಂದೋಲನ ಕಾರ್ಯಕ್ರಮದಲ್ಲಿ ಕಂದಾಯ, ತೋಟಗಾರಿಕೆ, ಕೃಷಿ, ಪಂಚಾಯತ ರಾಜ್ಯ ಮತ್ತು ಗ್ರಾಮೀಣಾಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ಅರ್ಹ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರು ವಿತರಿಸಿದರು.

37 ಗ್ರಾ.ಪಂಚಾಯತವಾರು ಅರ್ಜಿ ಸ್ವೀಕಾರ:  ಜಿಲ್ಲಾ ಉಸ್ತುವಾರಿ ಸಚಿವರು ಭಾಗವಹಿಸಿದ್ದ ಇಂದಿನ ಹರಪನಹಳ್ಳಿ ತಾಲೂಕುಮಟ್ಟದ ಜನಸೇವಾ ಆಂದೋಲನ ಕಾರ್ಯಕ್ರಮ ಸ್ಥಳದಲ್ಲಿ ಹರಪನಹಳ್ಳಿ ತಾಲೂಕಿನ ಎಲ್ಲ 37 ಗ್ರಾಮ ಪಂಚಾಯತ್‌ಗಳಿಂದ ಸಾರ್ವಜನಿಕರ ಅಹವಾಲು, ದೂರು, ಸಮಸ್ಯೆಗಳ ಬಗ್ಗೆ ಅರ್ಜಿ ಸ್ವೀಕರಿಸಲು ಗ್ರಾಮ ಪಂಚಾಯತ್‌ವಾರು ಪ್ರತ್ಯೇಕ ಕೇಂದ್ರಗಳನ್ನು ತೆರೆಯಲಾಗಿತ್ತು.
ಜಿಲ್ಲಾ ನಗರಾಭಿವೃದ್ಧಿಕೋಶ, ಕಲ್ಯಾಣ ಕರ್ನಾಟಕ ಸಾರಿಗೆ ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ, ನಿಗಮ ಮಂಡಳಿಗಳಿಂದ ಸಾರ್ವಜನಿಕರ ಅಹವಾಲು ಸ್ವೀಕರಿಸಿ, ನೋಂದಾಯಿಸಲು ಪ್ರತ್ಯೇಕ ಕೌಂಟರ ತೆರೆಯಲಾಗಿತ್ತು.ಎಲ್ಲ ಕೌಂಟರ್‌ಗಳಲ್ಲಿ ತಾಲೂಕಿನ ಸಾರ್ವಜನಿಕರು ತಮ್ಮ ಸಮಸ್ಯೆಗಳ ಕುರಿತು ಅಹವಾಲು ಸಲ್ಲಿಸಿ, ನೋಂದಣಿ ಪತ್ರ ಪಡೆಯುವುದು ಸಾಮಾನ್ಯವಾಗಿತ್ತು.
ಯುವ ಮತದಾರ ಜಾಗೃತಿ ಆಂದೋಲನ:  ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ವಿಜಯನಗರ ಜಿಲ್ಲೆಯಲ್ಲಿ ಎಸ್‌ಐಆರ್ ವಿಶೇಷ ಆಂದೋಲನ ಕಾರ್ಯ ನಡೆದಿದ್ದು, ಅದರಂತೆ ಇಂದಿನ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮ ಸ್ಥಳದಲ್ಲಿ ಎಸ್‌ಐಆರ್ ಕಾರ್ಯಕ್ರಮದ ಕುರಿತು ವಿಶೇಷ ಜಾಗೃತಿಗಾಗಿ ಕೌಂಟರ್ ತೆರೆಯಲಾಗಿತ್ತು. ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ, ಹೆಸರು ಸೇರ್ಪಡೆ, ತಿದ್ದುಪಡಿ, ತೆಗೆದುಹಾಕುವುದು, ವರ್ಗಾವಣೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಸಾರ್ವಜನಿಕರಿಗೆ ತಿಳುವಳಿಕೆ ನೀಡಲಾಯಿತು.

ಸಹಾಯ ಸಂಘಗಳ ಕರಕುಶಲ ವಸ್ತುಗಳ ಪ್ರದರ್ಶನ: ಪ್ರಜಾ ಸೇವೆ ಆಂದೋಲನ ಕಾರ್ಯಕ್ರಮ ಸ್ಥಳದಲ್ಲಿ ಹರಪನಹಳ್ಳಿ ತಾಲೂಕಿನ ವಿವಿಧ ಗ್ರಾಮಗಳ ಮಹಿಳಾ ಸ್ವ-ಸಹಾಯ ಸಂಘಗಳು ತಯಾರಿಸಿದ್ದ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ವ್ಯವಸ್ಥೆ ಕಲ್ಪಿಸಲಾಗಿತ್ತು. ಅನೇಕ ಮಹಿಳಾ ಸ್ವ-ಸಹಾಯ ಸಂಘಗಳು, ಸ್ತ್ರೀ ಶಕ್ತಿ ಗುಂಪುಗಳು ಭಾಗವಹಿಸಿದ್ದವು. ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಅವರು ಸ್ವಾಗತಿಸಿದರು.  ಮತ್ತು ಪ್ರಾಸ್ತಾವಿಕವಾಗಿ ಮಾತನಾಡಿ, ಎಲ್ಲ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಿ, ಸ್ವೀಕೃತಿ ಪಡೆಯಬೇಕೆಂದು ಹೇಳಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗರಿಮಾ ಪನ್ವರ್, ಅರಣ್ಯ ಇಲಾಖೆ ಉಪ ಸಂರಕ್ಷಣಾಧಿಕಾರಿ ಅನುಪಮ, ಉಪವಿಭಾಗಾಧಿಕಾರಿ ಟಿ.ಸುರೇಶ ಕುಮಾರ, ಹರಪನಹಳ್ಳಿ ತಹಶೀಲ್ದಾರ್ ಗಿರೀಶ ಬಾಬು, ಗ್ಯಾರಂಟಿ ಯೋಜನೆಗಳ ತಾಲೂಕು ಅನುಷ್ಠಾನ ಸಮಿತಿ ಅಧ್ಯಕ್ಷ ಉದಯಕುಮಾರ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Homeಸುದ್ದಿಗಳು

ವಿಮೋಚನಾ ಹೋರಾಟದ ಇತಿಹಾಸವನ್ನು ಇಂದಿನ ಪೀಳಿಗೆಗೆ ತಲುಪಿಸಿ: ಸಿ. ಹಾಲೇಶ್

ಹರಪನಹಳ್ಳಿ: ದೇಶಕ್ಕೆ ಸ್ವಾತಂತ್ರ್ಯ ದೊರೆತ ಬಳಿಕವೂ ಹೈದರಾಬಾದ್ ನಿಜಾಮರು ಮತ್ತು ರಜಾಕಾರರ ದಬ್ಬಾಳಿಕೆಗೆ ಕಲ್ಯಾಣ ಕರ್ನಾಟಕ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.