ಹರಪನಹಳ್ಳಿ : ದುಶ್ಚಟಗಳಿಂದ ದೂರವಿದ್ದು, ಶಿಸ್ತಿನ ಜೀವನಶೈಲಿ ರೂಢಿಸಿಕೊಳ್ಳುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದು ಅರಸೀಕೆರೆ ಶ್ರೀ ಕೋಲಶಾಂತೇಶ್ವರ ಮಠದ ಶಾಂತಲಿಂಗ ದೇಶಿಕೇಂದ್ರ ಸ್ವಾಮೀಜಿ ಅಭಿಪ್ರಾಯಪಟ್ಟರು.
ಜನನಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರವು ಶ್ರೀಕೋಲಶಾಂತೇಶ್ವರ ಜನಕಲ್ಯಾಣ ಕೇಂದ್ರದ ಸಹಯೋಗದಲ್ಲಿ ಶುಕ್ರವಾರ ಶ್ರೀಮಠದ ಆವರಣದಲ್ಲಿ ಏರ್ಪಡಿಸಿದ್ದ ಉಚಿತ ಪ್ರಕೃತಿ ಚಿಕಿತ್ಸಾ ಶಿಬಿರದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
“ಯೋಗದಿಂದ ರೋಗ ದೂರವಾಗುತ್ತದೆ, ಅಂತೆಯೇ ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಪ್ರಕೃತಿ ನಮಗೆ ನೀಡಿದ ಅನೇಕ ಅಂಶಗಳನ್ನು ನಾವಿಂದು ಮರೆತಿದ್ದೇವೆ. ಔಷಧ ರಹಿತವಾಗಿ ನಮ್ಮ ಜೀವನಶೈಲಿ ಮಾರ್ಪಡಿಸಿಕೊಳ್ಳುವ ಮೂಲಕ ಮರೆತ ಅಂಶಗಳನ್ನು ನಮಗೆ ಪ್ರಕೃತಿ ಚಿಕಿತ್ಸಾ ಪದ್ಧತಿ ನೆನಪಿಸುತ್ತಿದೆ. ಈ ಬಗ್ಗೆ ಸಮಾಜದಲ್ಲಿ ಹೆಚ್ಚಿನ ಜಾಗೃತಿ ಮೂಡಿದಾಗ ಮಾತ್ರ ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು.
ಯುವ ಬಿಜೆಪಿ ಮುಖಂಡ ವೈ.ಡಿ.ಅಣ್ಣಪ್ಪ ಅತಿಥಿಗಳಾಗಿ ಮಾತನಾಡಿ, ಒಮ್ಮೆ ಆರೋಗ್ಯ ಹದಗೆಟ್ಟರೆ ಸರಿಪಡಿಸಿಕೊಳ್ಳುವುದು ಕಷ್ಟಸಾಧ್ಯ. ಆರೋಗ್ಯಸೇವೆ ದುಬಾರಿಯಾಗುತ್ತಿರುವ ಇಂದಿನ ದಿನಗಳಲ್ಲಿ ರೋಗ ಬಾರದಂತೆ ಮುನ್ನೆಚ್ಚರಿಕೆ ವಹಿಸುವುದೇ ಜಾಣತನ. ಯೋಗ ಮತ್ತು ಪ್ರಕೃತಿ ಚಿಕಿತ್ಸೆಯ ಪ್ರಯೋಜನ ಪಡೆದುಕೊಳ್ಳುವ ಜೊತೆಗೆ ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದರು.
ಪಾಶ್ಚಾತ್ಯರ ಅಂಧಾನುಕರಣೆ ತೊರೆದ ನಮ್ಮ ಆಹಾರಪದ್ಧತಿಯನ್ನು ಅಳವಡಿಸಿಕೊಳ್ಳುವ ಮೂಲಕ ರೋಗಗಳಿಂದ ದೂರ ಇರೋಣ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಪ್ರಶಾಂತ್ ಪಾಟೀಲ ಸಲಹೆ ಮಾಡಿದರು.
ಜನನಿ ಆಸ್ಪತ್ರೆಯ ಮಾಧ್ಯಮ ಮತ್ತು ಸಾರ್ವಜನಿಕ ಸಂಪರ್ಕ ಮುಖ್ಯಸ್ಥ ಉದಯಶಂಕರ ಭಟ್ ಮಾತನಾಡಿದರು. ಜನಕಲ್ಯಾಣ ಕೇಂದ್ರದ ವ್ಯವಸ್ಥಾಪಕ ಪ್ರದೀಪ್ ಇದ್ದರು. ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ನೂರಕ್ಕೂ ಹೆಚ್ಚು ಮಂದಿ ಶಿಬಿರದ ಪ್ರಯೋಜನ ಪಡೆದರು.
Leave a comment