ಹರಪನಹಳ್ಳಿ: ತಾಲ್ಲೂಕಿನ ಬಾಗಳಿ ಗ್ರಾಮದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಮಹಿಳಾ ಸ್ವಸಹಾಯ ಸಂಘದ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ನಿರ್ದೇಶಕಿ ಶ್ವೇತಾ, ‘ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಸ್ವಾವಲಂಬಿಗಳಾಗಿ ಹಾಗೂ ಸ್ವತಂತ್ರವಾಗಿ ಬೆಳೆಯಬೇಕು. ತಮ್ಮ ಹಕ್ಕುಗಳನ್ನು ಹೇಗೆ ಪಡೆಯಬೇಕು ಎಂಬುದರ ಬಗ್ಗೆ ಅರಿವು ಮೂಡಿಸಿಕೊಳ್ಳುವುದು ಇಂದಿನ ಅಗತ್ಯವಾಗಿದೆ’ ಎಂದು ಕಿವಿಮಾತು ಹೇಳಿದರು.
‘ಮಕ್ಕಳು 18 ವರ್ಷ ತುಂಬುವವರೆಗೆ ಯಾವುದೇ ಕಾರಣಕ್ಕೂ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಬಾರದು. ಪ್ರತಿಯೊಬ್ಬರೂ ಕಡ್ಡಾಯವಾಗಿ ಉನ್ನತ ಶಿಕ್ಷಣವನ್ನು ಪಡೆಯಬೇಕು. ಸಮಾಜದಲ್ಲಿರುವ ಬಾಲ್ಯ ವಿವಾಹದಂತಹ ಅನಿಷ್ಟ ಪದ್ಧತಿಗಳನ್ನು ಸಂಪೂರ್ಣವಾಗಿ ತಡೆಯಲು ಎಲ್ಲರೂ ಒಗ್ಗೂಡಬೇಕು’ ಎಂದು ಸಭೆಯಲ್ಲಿ ಚರ್ಚಿಸಲಾಯಿತು.
ಸಾಧಕಿಯರಿಗೆ ಸನ್ಮಾನ:
ಕಾರ್ಯಕ್ರಮದಲ್ಲಿ ಮಕ್ಕಳು ಅತ್ಯುತ್ಸಾಹದಿಂದ ಪಾಲ್ಗೊಂಡು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿಜೃಂಭಣೆಯಿಂದ ನಡೆಸಿಕೊಟ್ಟರು. ಇದೇ ವೇಳೆ ಬಾಗಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಮತ್ತು ಕಿತ್ತೂರು ರಾಣಿ ಚೆನ್ನಮ್ಮ ಮಹಿಳಾ ಸ್ವಸಹಾಯ ಸಂಘದ ಸಿಬ್ಬಂದಿಯನ್ನು ವೇದಿಕೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಬಾಗಳಿಯ ಕೀಲು ಮೂಳೆ ನಾಟಿ ವೈದ್ಯರಾದ ಪಂಡಿತ್ ಬಿ.ಬಿ. ವಸರಪ್ಪ, ಅರಕನಹಳ್ಳಿಯ ಆಶಾ ಮೇಲ್ವಿಚಾರಕಿ ಪವಿತ್ರಾ, ಹರಪನಹಳ್ಳಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ರತ್ನಮ್ಮ ದೊಡ್ಡಬೆಣ್ಣೆ ಹಾಗೂ ಕೂಲಹಳ್ಳಿಯ ವಿಪ್ರಾ ಗ್ರಾಮೀಣ ಸಂಸ್ಥೆಯ ಅಧ್ಯಕ್ಷ ಸೋಮನಾಥ ಎಂ. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
Leave a comment