ಹೊಸಪೇಟೆ (ವಿಜಯನಗರ): ಜಿಲ್ಲೆಯಲ್ಲಿ ಕುಂಠಿತಗೊಂಡಿರುವ 7ನೇ ಸಣ್ಣ ನೀರಾವರಿ ಹಾಗೂ 2ನೇ ಜಲಮೂಲಗಳ ಗಣತಿಯನ್ನು ಸರ್ಕಾರದ ನಿರ್ದೇಶನದಂತೆ ಜೂನ್ 15ರ ಒಳಗಾಗಿ ಕಡ್ಡಾಯವಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಸೋಮವಾರ ತಮ್ಮ ಕಚೇರಿಯಲ್ಲಿ ಸಾಂಖ್ಯಿಕ (ಅಂಕಿ-ಸಂಖ್ಯೆ) ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಜಂಟಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಗಣತಿ ಕಾರ್ಯವನ್ನು ಯಶಸ್ವಿಗೊಳಿಸಲು ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು (AEE) ತಹಶೀಲ್ದಾರ್ಗಳೊಂದಿಗೆ ಸೂಕ್ತ ಸಮನ್ವಯ ಸಾಧಿಸಬೇಕು ಎಂದು ತಾಕೀತು ಮಾಡಿದರು.
“ಪ್ರಕೃತಿ ವಿಕೋಪ, ಬರಗಾಲ ಅಥವಾ ಕೀಟಬಾಧೆಯಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ಸರಿಯಾದ ವಿಮಾ ಸೌಲಭ್ಯ ಹಾಗೂ ಪರಿಹಾರ ಸಿಗಬೇಕಾದರೆ, ‘ಬೆಳೆ ಕಟಾವು ಪ್ರಯೋಗ’ದ (Crop Cutting Experiment) ಅಂಕಿ-ಅಂಶಗಳು ಅತ್ಯಂತ ನಿಖರವಾಗಿರಬೇಕು. ಅಧಿಕಾರಿಗಳ ತಪ್ಪು ಲೆಕ್ಕಾಚಾರದಿಂದ ಯಾವೊಬ್ಬ ರೈತನಿಗೂ ಅನ್ಯಾಯವಾಗಬಾರದು” ಎಂದು ಡಿಸಿ ಕಟ್ಟುನಿಟ್ಟಾಗಿ ಎಚ್ಚರಿಸಿದರು.
ಬೆಳೆ ಕಟಾವು ಪ್ರಯೋಗಗಳನ್ನು ಪಾರದರ್ಶಕವಾಗಿ ನಡೆಸಲು ಕೃಷಿ, ತೋಟಗಾರಿಕೆ ಅಧಿಕಾರಿಗಳು, ಪಿಡಿಒ (PDO) ಮತ್ತು ಗ್ರಾಮ ಆಡಳಿತ ಅಧಿಕಾರಿಗಳು (VAO) ಜಂಟಿಯಾಗಿ ಜಮೀನುಗಳಿಗೆ ಖುದ್ದು ಭೇಟಿ ನೀಡಬೇಕು. ಬೆಳೆ ಕಟಾವು ಪ್ರಕ್ರಿಯೆಗೆ ನಿಗದಿಪಡಿಸಿದ ತಾಂತ್ರಿಕ ಆ್ಯಪ್ ಅನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಕಟಾವು ನಡೆಯುವ ಸಮಯದಲ್ಲಿ ಸಂಬಂಧಪಟ್ಟ ವಿಮಾ ಕಂಪನಿಯ ಅಧಿಕಾರಿಗಳು ಕಡ್ಡಾಯವಾಗಿ ಸ್ಥಳದಲ್ಲಿ ಹಾಜರಿರಬೇಕು. ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ನಮೂನೆ 1 ಮತ್ತು 2ರ ದಾಖಲೀಕರಣವನ್ನು ಕೂಡಲೇ ಪೂರ್ಣಗೊಳಿಸಬೇಕು. ರೈತರ ಬೆಳೆ ವಿಮೆಗೆ ಸಂಬಂಧಿಸಿದ ಈ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಅಥವಾ ಬೇಜವಾಬ್ದಾರಿತನ ತೋರಿದರೆ, ಅಂತಹ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು.
ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ಎನ್.ಕೆ. ಪತ್ರಿಬಸಪ್ಪ, ರೇಷ್ಮೆ ಇಲಾಖೆ ಉಪನಿರ್ದೇಶಕ ಶ್ರೀಹರ್ಷ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಪ್ರಭುರಾಜ, ಜಿ.ಪಂ. ಮುಖ್ಯ ಯೋಜನಾಧಿಕಾರಿ ಅನ್ನದಾನಸ್ವಾಮಿ ಸೇರಿದಂತೆ ಹಲವು ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Leave a comment