ದಾವಣಗೆರೆ : ನಗರದಲ್ಲಿ ಕುಡಿಯುವ ನೀರನ್ನು ಪೋಲು ಮಾಡುತ್ತಿದ್ದ ಮನೆಗಳ ವಿರುದ್ಧ ಮಹಾನಗರ ಪಾಲಿಕೆ ಕಠಿಣ ಕ್ರಮ ಕೈಗೊಂಡಿದೆ. ನಗರದ ಎಸ್.ಎಸ್. ಬಡಾವಣೆ ಹಾಗೂ ಬಸವೇಶ್ವರನಗರಗಳಲ್ಲಿ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ದಿಢೀರ್ ಜಂಟಿ ಕಾರ್ಯಾಚರಣೆ ನಡೆಸಿ, ನೀರನ್ನು ಪೋಲು ಮಾಡುತ್ತಿದ್ದ ಮನೆ ಮಾಲೀಕರಿಗೆ ದಂಡ ವಿಧಿಸುವುದರ ಜೊತೆಗೆ ಅವರ ಮನೆಗಳ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರಾದ ಮಹಾಂತೇಶ್ ಅವರು ತಿಳಿಸಿದ್ದಾರೆ.
ಕುಡಿಯುವ ನೀರನ್ನು ಅನಗತ್ಯವಾಗಿ ಪೈಪ್ಗಳ ಮೂಲಕ ರಸ್ತೆಗೆ ಹರಿಸುವುದು, ವಾಹನ ತೊಳೆಯಲು ಹಾಗೂ ಗಿಡಗಳಿಗೆ ಅತಿಯಾಗಿ ಬಳಸಿ ಪೋಲು ಮಾಡುತ್ತಿದ್ದ ಮನೆಗಳನ್ನು ಗುರುತಿಸಿ ಈ ಕ್ರಮ ಕೈಗೊಳ್ಳಲಾಗಿದೆ. ನಿಯಮ ಉಲ್ಲಂಘಿಸಿದ ಹಲವು ಮನೆ ಮಾಲೀಕರಿಗೆ ಸ್ಥಳದಲ್ಲೇ ದಂಡ ವಿಧಿಸಲಾಗಿದ್ದು, ಎಚ್ಚರಿಕೆಯನ್ನು ನಿರ್ಲಕ್ಷಿಸಿದ ಮನೆಗಳ ಕುಡಿಯುವ ನೀರಿನ ಸಂಪರ್ಕವನ್ನು ತಕ್ಷಣವೇ ಕಡಿತಗೊಳಿಸಲಾಗಿದೆ.
ನಗರದಾದ್ಯಂತ ನೀರು ಪೋಲು ಮಾಡುವುದನ್ನು ತಡೆಯಲು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಿಶೇಷ ಪಡೆಗಳನ್ನು ರಚಿಸಲಾಗಿದ್ದು, ಮುಂದಿನ ದಿನಗಳಲ್ಲೂ ಈ ಕಾರ್ಯಾಚರಣೆ ತೀವ್ರವಾಗಿ ಮುಂದುವರೆಯಲಿದೆ.
ಸಾರ್ವಜನಿಕರಿಗೆ ಆಯುಕ್ತರ ಮನವಿ:
ನೀರು ಅತ್ಯಂತ ಅಮೂಲ್ಯವಾದದ್ದು. ಪ್ರತಿಯೊಬ್ಬ ನಾಗರಿಕರೂ ನೀರನ್ನು ಮಿತವಾಗಿ ಮತ್ತು ಜವಾಬ್ದಾರಿಯುತವಾಗಿ ಬಳಸಬೇಕು. ಯಾವುದೇ ಕಾರಣಕ್ಕೂ ನೀರನ್ನು ರಸ್ತೆ ತೊಳೆಯಲು, ವಾಹನ ತೊಳೆಯಲು ಅಥವಾ ಪೋಲು ಮಾಡಲು ಬಳಸಬಾರದು. ಸಾರ್ವಜನಿಕರು ಪಾಲಿಕೆಯೊಂದಿಗೆ ಸಹಕರಿಸಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಯಾವುದೇ ಮುನ್ಸೂಚನೆ ನೀಡದೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಹಾನಗರ ಪಾಲಿಕೆ ಆಯುಕ್ತರಾದ ಮಹಾಂತೇಶ್ ಅವರು ತಿಳಿಸಿದ್ದಾರೆ.
Leave a comment