ಹರಪನಹಳ್ಳಿ: ರಾಜ್ಯದಲ್ಲಿ ಮಾದಿಗ ಸಮಾಜಕ್ಕೆ ಒಳಮೀಸಲಾತಿ ಕಲ್ಪಿಸುವ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಹರಪನಹಳ್ಳಿ ತಾಲ್ಲೂಕಿನ ಮಾದಿಗ ಸಮಾಜದ ಮುಖಂಡರು ಸೋಮವಾರ ಪ್ರತಿಭಟನೆ ನಡೆಸಿದರು.
ನಗರದ ತಾಲ್ಲೂಕು ಆಡಳಿತ ಸೌಧದ ಆವರಣದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಮಾದಿಗ ಸಮಾಜದ ಹಿರಿಯ ಮುಖಂಡ ಕಣಿವಿಹಳ್ಳಿ ಮಂಜುನಾಥ ಮಾತನಾಡಿ, “ಮಾದಿಗ ಸಮಾಜದ ಮೂರು ದಶಕಗಳ ಹೋರಾಟದ ಫಲವಾಗಿ ಕೇಂದ್ರದ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರವು ಸುಪ್ರೀಂ ಕೋರ್ಟ್ ಮೂಲಕ ಒಳಮೀಸಲಾತಿ ನೀಡಲು ರಾಜ್ಯಗಳಿಗೆ ಅಧಿಕಾರ ಕೊಡಿಸಿತು. ಆದರೆ, ರಾಜ್ಯದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಕಳೆದ ಎರಡು ವರ್ಷಗಳಿಂದ ಈ ಪ್ರಕ್ರಿಯೆ ಜಾರಿಗೆ ವಿಳಂಬ ಮಾಡುತ್ತಿದೆ,” ಎಂದು ಆರೋಪಿಸಿದರು.
ಸಚಿವರಾದ ಎಚ್.ಸಿ. ಮಹದೇವಪ್ಪ, ಪ್ರಿಯಾಂಕ್ ಖರ್ಗೆ ಮತ್ತು ಜಿ. ಪರಮೇಶ್ವರ್ ಅವರು ತಮ್ಮ ಸ್ವಂತ ಹಿತಾಸಕ್ತಿಗಾಗಿ ಮಾದಿಗ ಸಮಾಜಕ್ಕೆ ಅನ್ಯಾಯ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರವು ಒಳಮೀಸಲಾತಿ ಹೋರಾಟದ ಕುತ್ತಿಗೆಗೆ ನೇಣು ಹಾಕುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ಮತ್ತು ನಾಗಮೋಹನ ದಾಸ್ ಆಯೋಗದ ವರದಿಗಳನ್ನು ಯಥಾವತ್ತಾಗಿ ಜಾರಿಗೊಳಿಸಬೇಕು. ಹಿಂದಿನ ಬಿಜೆಪಿ ಸರ್ಕಾರವು ನೀಡಿದ್ದ ಶೇ 17ರಷ್ಟು ಮೀಸಲಾತಿಯನ್ನು ಕಡಿತಗೊಳಿಸಿ ಶೇ 15ಕ್ಕೆ ಇಳಿಸಿರುವುದನ್ನು ಕೈಬಿಡಬೇಕು. ಒಳಮೀಸಲಾತಿ ಅನ್ವಯವೇ ಬಾಕಿ ಇರುವ 56,000 ಉದ್ಯೋಗಗಳ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಮುಖಂಡರಾದ ಹುಲಿಕಟ್ಟೆ ಪಕ್ಕೀರಪ್ಪ, ಸುನೀಲ್ ಕುಮಾರ, ಎಂ.ಎಸ್.ಪಿ.ಪಕ್ಕೀರಪ್ಪ, ರಾಜ, ಸುರೇಶ, ಪಿ.ಕೋಟೆಪ್ಪ, ಇದ್ದರು.
Leave a comment