ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಶನಿವಾರ ಅತ್ಯಂತ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಸದಾ ಕುತೂಹಲ ಮೂಡಿಸುತ್ತಿದ್ದ ಮುಂದಿನ ಮುಖ್ಯಮಂತ್ರಿ ಗಾದಿಯ ವಿಷಯಕ್ಕೆ ಈಗ ಅಧಿಕೃತ ತೆರೆ ಬಿದ್ದಿದೆ!
ಶಾಸಕಾಂಗ ಪಕ್ಷದ ಸಭೆ ಬಳಿಕ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ ಮಾತನಾಡಿ, “ಕಾಂಗ್ರೆಸ್ ಪಕ್ಷ ಎನ್ನುವುದು ಒಂದು ದೊಡ್ಡ ಕುಟುಂಬ. ಸಿದ್ದರಾಮಯ್ಯ ಅವರೇ ಮುಂದಿನ ನಾಯಕನಾಗಿ ಡಿ.ಕೆ. ಶಿವಕುಮಾರ್ ಹೆಸರನ್ನು ಸೂಚಿಸಿದ್ದು, ಪರಮೇಶ್ವರ ಅವರು ಬೆಂಬಲಿಸಿದ್ದಾರೆ. ಇದನ್ನು ನಿಮ್ಮ ಮುಂದೆ ಘೋಷಿಸಲು ನನಗೆ ಹೆಮ್ಮೆಯಾಗುತ್ತಿದೆ ಎಂದರು.
ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿದೆ. ಡಿ.ಕೆ.ಶಿವಕುಮಾರ ಅವರ ಹೆಸರನ್ನು ಸಿದ್ದರಾಮಯ್ಯ ಅವರೇ ಸೂಚಿಸಿದರು, ಡಾ.ಜಿ.ಪರಮೇಶ್ವರ ಅವರು ಅನುಮೋದಿಸಿದ್ದಾರೆ. ಇದನ್ನು ಘೋಷಿಸಲು ನನಗೆ ಹೆಮ್ಮೆ ಎನಿಸುತ್ತದೆ ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷದ ಹೈಕಮಾಂಡ್ ತೀರ್ಮಾನದಂತೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದ್ದಾರೆ. ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಅಂಗೀಕಾರವಾಗಿದೆ.ಉತ್ತಮ ಸೇವೆ ಸಲ್ಲಿಸಿದ ಸಿದ್ದರಾಮಯ್ಯ ಅವರನ್ನು ಅಬಿನಂಧಿಸುತ್ತೇನೆ. ಡಿ.ಕೆ. ಶಿವಕುಮಾರ್ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ರಾಹುಲ್ ಗಾಂಧಿ ಹಾಗೂ ಹಿರಿಯಣ್ಣ ಸಿದ್ದರಾಮಯ್ಯ ಅವರಂತಹ ಹಿರಿಯರ ಸಂಪೂರ್ಣ ಮಾರ್ಗದರ್ಶನ ಸಿಗಲಿದೆ. ಇದೇ ಒಗ್ಗಟ್ಟಿನ ಬಲದೊಂದಿಗೆ ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಕೆ.ಸಿ. ವೇಣುಗೋಪಾಲ್ ವಿಶ್ವಾಸ ವ್ಯಕ್ತಪಡಿಸಿದರು.
ಇತ್ತ ಸಭೆಯ ನಿರ್ಧಾರ ಹೊರಬೀಳುತ್ತಿದ್ದಂತೆ ವಿಧಾನಸೌಧದ ಸುತ್ತಮುತ್ತ ಜಮಾಯಿಸಿದ್ದ ಸಾವಿರಾರು ಅಭಿಮಾನಿಗಳು “ಡಿ ಕೆ, ಡಿ ಕೆ…” ಎಂದು ಗಗನಚುಂಬಿ ಘೋಷಣೆಗಳನ್ನು ಕೂಗುತ್ತಾ ಸಿಹಿ ಹಂಚಿ ಭರ್ಜರಿಯಾಗಿ ಸಂಭ್ರಮಿಸಿದರು.
ಸಿಎಲ್ಪಿ ಸಭೆಯ ಪ್ರಮುಖ ಮುಖ್ಯಾಂಶಗಳು:
- ಅವಿರೋಧ ಆಯ್ಕೆ: ಶನಿವಾರ ವಿಧಾನಸೌಧದ ಸಭಾಂಗಣದಲ್ಲಿ ಜರುಗಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಮಹತ್ವದ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಒಮ್ಮತದಿಂದ ಅಂತಿಮಗೊಳಿಸಲಾಗಿದೆ.
- ಹೆಸರು ಸೂಚಿಸಿದ ಸಿದ್ದರಾಮಯ್ಯ: ಈ ನಿರ್ಧಾರದ ಅತ್ಯಂತ ವಿಶೇಷ ಸಂಗತಿಯೆಂದರೆ, ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಖುದ್ದಾಗಿ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಪ್ರಸ್ತಾಪಿಸಿದರು. ಇದನ್ನು ಹಿರಿಯ ನಾಯಕ ಡಾ. ಜಿ. ಪರಮೇಶ್ವರ ಅವರು ಸಭೆಯಲ್ಲಿ ಅನುಮೋದಿಸಿದರು.
- ರಾಜೀನಾಮೆ ಅಂಗೀಕಾರ: ಹೈಕಮಾಂಡ್ ಸೂಚನೆಯಂತೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ. ಈವರೆಗೆ ರಾಜ್ಯಕ್ಕೆ ಸಿದ್ದರಾಮಯ್ಯ ಅವರು ನೀಡಿದ ಅತ್ಯುತ್ತಮ ಸೇವೆಯನ್ನು ಪಕ್ಷ ಮುಕ್ತಕಂಠದಿಂದ ಶ್ಲಾಘಿಸಿದೆ.
Leave a comment