ಹರಪನಹಳ್ಳಿ : ಬಾಲ ಕಾರ್ಮಿಕ ಪದ್ಧತಿಯು ಸಮಾಜದ ದೊಡ್ಡ ಪಿಡುಗಾಗಿದ್ದು, ಪ್ರತಿಯೊಬ್ಬ ಮಗುವಿಗೂ ಶಿಕ್ಷಣ, ಆರೋಗ್ಯ ಹಾಗೂ ಸುರಕ್ಷಿತ ಬಾಲ್ಯ ಸಿಗುವಂತೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಚಿಗಟೇರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ (ಎಸ್.ಐ) ನಾಗರತ್ನಮ್ಮ ತಿಳಿಸಿದರು. ಇಲ್ಲಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ‘ಭಾವೈಕ್ಯತೆ ಸಮಾಜಮುಖಿ ಟ್ರಸ್ಟ್’ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ’ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮುಖ್ಯ ಅತಿಥಿಯಾಗಿದ್ದ ಬಿ. ಭಾಗ್ಯ ಮಾತನಾಡಿ, “18ನೇ ಶತಮಾನದ ಕೈಗಾರಿಕಾ ಕ್ರಾಂತಿಯ ವೇಳೆ ಮಕ್ಕಳನ್ನು ಕಡಿಮೆ ಕೂಲಿಗೆ ಅಪಾಯಕಾರಿ ಕೆಲಸಗಳಿಗೆ ದೂಡುವ ಮೂಲಕ ಈ ಪದ್ಧತಿ ಆರಂಭವಾಯಿತು. ಪೋಷಕರು ಮಕ್ಕಳನ್ನು ದುಡಿಮೆಗೆ ತಳ್ಳದೆ ಕಡ್ಡಾಯವಾಗಿ ಶಾಲೆಗೆ ಕಳುಹಿಸಬೇಕು” ಎಂದರು. ಮತ್ತೊಬ್ಬ ಗಣ್ಯರಾದ ಬಳಿಗನೂರು ಕೊಟ್ರೇಶ್ ಮಾತನಾಡಿ, ಬಡತನದ ನೆಪವೊಡ್ಡಿ ಮಕ್ಕಳಿಗೆ ಶಿಕ್ಷಣ ವಂಚಿತರನ್ನಾಗಿ ಮಾಡಬಾರದು.
ಮಕ್ಕಳ ಭವಿಷ್ಯ ಉಜ್ವಲಗೊಳಿಸಲು ಪೋಷಕರು ಮುಂದಾಗಬೇಕು ಎಂದು ಕರೆ ನೀಡಿದರು. ಇದೇ ವೇಳೆ ವಿದ್ಯಾರ್ಥಿಗಳಿಗೆ ಬಾಲ ಕಾರ್ಮಿಕ ಪದ್ಧತಿಯ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಶಿಕ್ಷಕ ಕುಮಾರಸ್ವಾಮಿ, ಶಿಕ್ಷಕ ವೃಂದ, ಭಾವೈಕ್ಯತೆ ಸಮಾಜಮುಖಿ ಟ್ರಸ್ಟ್ನ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Leave a comment