ಹೊಸಪೇಟೆ (ವಿಜಯನಗರ): ಮಕ್ಕಳ ಸುಂದರ ಬಾಲ್ಯವನ್ನು ಕಸಿದುಕೊಳ್ಳುವ ಬಾಲ ಕಾರ್ಮಿಕ ಪದ್ಧತಿಯನ್ನು ಬೇರು ಸಹಿತ ಕಿತ್ತೆಸೆಯಲು ಜಿಲ್ಲಾ ಹಾಗೂ ತಾಲ್ಲೂಕು ಆಡಳಿತಗಳು ಸಕ್ರಿಯವಾಗಿ ಶ್ರಮಿಸಬೇಕು. ಜೂನ್ 12ರ ‘ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ’ಯು ಕೇವಲ ಒಂದು ಸಾಂಪ್ರದಾಯಿಕ ಕಾರ್ಯಕ್ರಮವಾಗದೆ, ಅರ್ಥಪೂರ್ಣಗೊಳಿಸಿ ಎಂದು ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
“ಜಿಲ್ಲೆ ಹಾಗೂ ಗ್ರಾಮೀಣ ಭಾಗದಲ್ಲಿ ವ್ಯಾಪಕ ಜಾಗೃತಿ ಮೂಡಿಸಬೇಕು. ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಹಾಗೂ ಶಾಲಾ ಮಕ್ಕಳಿಂದ ಜಾಗೃತಿ ಮೂಡಿಸುವ 10 ನಿಮಿಷಗಳ ಕಿರು ನಾಟಕಗಳನ್ನು ಪ್ರದರ್ಶಿಸಲು ಕ್ರಮ ಕೈಗೊಳ್ಳಿ” ಎಂದು ಅವರು ನಿರ್ದೇಶಿಸಿದರು. ಅಲ್ಲದೆ, ಬಾಲ ಕಾರ್ಮಿಕರನ್ನು ನೇಮಿಸಿಕೊಳ್ಳುವ ಹೋಟೆಲ್, ಗ್ಯಾರೇಜ್, ಬೇಕರಿ ಹಾಗೂ ಇಟ್ಟಿಗೆ ಭಟ್ಟಿಗಳನ್ನು ಗುರಿಯಾಗಿಸಿಕೊಂಡು ಟಾಸ್ಕ್ ಫೋರ್ಸ್ ಸಮಿತಿ ವತಿಯಿಂದ ನಿರಂತರವಾಗಿ ಜಂಟಿ ದಾಳಿ ನಡೆಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಭೆಯಲ್ಲಿ ಪ್ರತಿಕ್ರಿಯಿಸಿದ ಅಧಿಕಾರಿಗಳು, ಜಿಲ್ಲೆಯ ಪ್ರಮುಖ ವಾಣಿಜ್ಯ ಮಳಿಗೆಗಳಲ್ಲಿ ಈಗಾಗಲೇ ಕರಪತ್ರ ಹಾಗೂ ಪೋಸ್ಟರ್ಗಳನ್ನು ಅಂಟಿಸಿ ಜಾಗೃತಿ ಮೂಡಿಸಲಾಗುತ್ತಿದೆ. “ಯಾವುದೇ ಕಾರಣಕ್ಕೂ ಮಕ್ಕಳನ್ನು ಕೆಲಸಕ್ಕೆ ಇಟ್ಟುಕೊಳ್ಳುವುದಿಲ್ಲ” ಎಂದು ಮಾಲೀಕರಿಂದ ಲಿಖಿತ ಮುಚ್ಚಳಿಕೆ ಪತ್ರ ಪಡೆಯುವ ಪ್ರಕ್ರಿಯೆ ಭರದಿಂದ ಸಾಗುತ್ತಿದೆ ಎಂದು ಮಾಹಿತಿ ನೀಡಿದರು.
ನಿಮ್ಮ ಸುತ್ತಮುತ್ತ ಎಲ್ಲಾದರೂ ಮಕ್ಕಳ ಶೋಷಣೆ ಅಥವಾ ಬಾಲ ಕಾರ್ಮಿಕರು ಕಂಡುಬಂದರೆ, ಸಾರ್ವಜನಿಕರು ತಕ್ಷಣವೇ ಮಕ್ಕಳ ಉಚಿತ ಸಹಾಯವಾಣಿ ೧೦೯೮ ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಅಧಿಕಾರಿಗಳು ಕೋರಿದ್ದಾರೆ. ಜೂ. 12ರಂದು ಜಾಗೃತಿ ಜಾಥಾ
ದಿನಾಚರಣೆ ಅಂಗವಾಗಿ ಜೂನ್ 12ರಂದು ಬೆಳಿಗ್ಗೆ 9 ಗಂಟೆಗೆ ನಗರದ ಅಂಬೇಡ್ಕರ್ ವೃತ್ತದಿಂದ ಬೃಹತ್ ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ಈ ಜಾಥಾವು ಪುಣ್ಯಮೂರ್ತಿ ವೃತ್ತ, ಅಪ್ಪು ವೃತ್ತ, ಬಸ್ ನಿಲ್ದಾಣ ಹಾಗೂ ವಿಜಯನಗರ ಕಾಲೇಜು ರಸ್ತೆಯ ಮೂಲಕ ಸಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಮುಕ್ತಾಯಗೊಳ್ಳಲಿದೆ. ನಂತರ ಬೆಳಿಗ್ಗೆ ೧೦ ಗಂಟೆಗೆ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ.ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ, ಜಿಲ್ಲಾ ಕಾರ್ಮಿಕ ಅಧಿಕಾರಿ ಸೂರಪ್ಪ ಡೊಂಬರ ಮತ್ತೂರು, ಕಾರ್ಮಿಕ ನಿರೀಕ್ಷಕ ಶಿವಶಂಕರ್, ಯೋಜನಾ ನಿರ್ದೇಶಕ ಮೌನೇಶ್ ಸೇರಿದಂತೆ ವಿವಿಧ ಇಲಾಖೆಯ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.
Leave a comment