ವಿಜಯನಗರ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸೆಪ್ಟೆಂಬರ್ 6 ರಂದು ನಡೆಯಲಿರುವ ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್ಟೇಬಲ್ಗಳ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ನಡೆಸುತ್ತಿದ್ದು, ಯಾವುದೇ ಪರೀಕ್ಷಾ ಅಕ್ರಮಗಳಿಗೆ ಆಸ್ಪದವಿಲ್ಲದಂತೆ ಅತ್ಯಂತ ಪಾರದರ್ಶಕವಾಗಿ ಪರೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೆಬಲ್ ಪರೀಕ್ಷೆಯ ಪೂರ್ವ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿಜಯನಗರ ಜಿಲ್ಲೆಗ ಸಂಬಂಧಿಸಿದಂತೆ ಹೊಸಪೇಟೆಯಲ್ಲಿ ಒಟ್ಟು 9 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಬೆಳಗಿನ ಸಮಯದಲ್ಲಿ 4406 ಅಭ್ಯರ್ಥಿಗಳು ಹಾಗೂ ಮಧ್ಯಾಹ್ನ ಅಧಿವೇಶನದಲ್ಲಿ 4500 ಅಭ್ಯರ್ಥಿಗಳು ಲಿಖಿತ ಪರೀಕ್ಷೆಗೆ ಬರೆಯುವರು. ಪರೀಕ್ಷಾ ಸಮಯದಲ್ಲಿ ಯಾವುದೇ ಗೊಂದಲಗಳಿಗೆ ಎಡೆ ಮಾಡಿಕೊಡದೇ ಅತ್ಯಂತ ಪಾರದರ್ಶಕವಾಗಿ ಯಾವುದೇ ಲೋಪಗಳಿಲ್ಲದೆ, ಸುವ್ಯವಸ್ಥಿತವಾಗಿ ಪರೀಕ್ಷಾ ನಡೆಸಬೇಕು ಎಂದು ಕಟ್ಟಿನಿಟ್ಟಿನ ಸೂಚನೆ ನೀಡಿದರು. ಈಗಾಗಲೇ ತಮಗೆಲ್ಲ ಸಾಕಷ್ಟು ಪರೀಕ್ಷಾ ನಡೆಸಿರುವ ಅನುವವಿದೆ. ಆದರೂ ಇಲಾಖೆ ನಿಯಮಗಳನ್ನು ಪಾಲಿಸುವ ಮೂಲಕ ಸಣ್ಣ ಲೋಪವುಂಟಾಗದೇ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದರು.
ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಉತ್ತಮ ಬೆಳಕಿನ ವ್ಯವಸ್ಥೆಯ ಕೊಠಡಿ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಬೇಕು ಎಂದರು. ಪ್ರಶ್ನೆಪತ್ರಿಕೆ ಇರಿಸುವ ಕೊಠಡಿಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಇವುಗಳನ್ನು ವೆಬ್ಕಾಸ್ಟಿಂಗ್ ಮೂಲಕ ನಿಗಾ ವಹಿಸಲಾಗುತ್ತದೆ. ಪರೀಕ್ಷಾ ಕೇಂದ್ರದ ಒಳಗೆ ಮೊಬೈಲ್ ಫೋನ್, ಸ್ಮಾರ್ಟ್ ವಾಚ್, ಬ್ಲೂಟೂತ್, ಕ್ಯುಲ್ಕುಲೇಟರ್ ಸೇರಿದಂತೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ಸ್ ಸಾಧನಗಳನ್ನು ತರುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ 144ನೇ ಸೆಕ್ಷನ್ ಜಾರಿಗೊಳಿಸಲಾಗುವುದು. ಅಷ್ಟೇ ಅಲ್ಲದೆ, ಕೇಂದ್ರದ ವ್ಯಾಪ್ತಿಯಲ್ಲಿನ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷೆ ಮುಗಿಯುವವರೆಗೆ ಮುಚ್ಚಬೇಕು ಎಂದು ತಿಳಿಸಿದರು. ಈ ವೇಳೆ ಅಪರ ಜಿಲ್ಲಾಧಿಕಾರಿ ಪಿ. ಎನ್. ಲೋಕೇಶ್ ಸೇರಿದಂತೆ ವಿವಿದ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.
Leave a comment