ವಿಜಯನಗರ:ಪ್ರಸಕ್ತ ಸಾಲಿನ ಗೌರಿ-ಗಣೇಶ ಹಬ್ಬದ ಸಾರ್ವಜನಿಕ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆಗೆ ಬಂಧಿಸಿದಂತೆ ಸಾರ್ವಜನಿಕರಿಗೆ ಮತ್ತು ವಿವಿಧ ಉತ್ಸವ ಸಮಿತಿಗಳಿಗೆ ಸುಲಭವಾಗಿ ಅನುಮತಿ ದೊರೆಯುವಂತೆ ಮಾಡಲು ಜಿಲ್ಲೆಯಾದ್ಯಂತ ತಾಲೂಕು ಮತ್ತು ನಗರ ಮಟ್ಟದಲ್ಲಿ ಏಕ ಗವಾಕ್ಷಿ ಸಮಿತಿ ರಚಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಅವರು ಆದೇಶಿಸಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಮೂರ್ತಿ ಪ್ರತಿಷ್ಠಾಪಿಸುವ ಸ್ಥಳದ ಅನುಮತಿ ಹಾಗೂ ಬ್ಯಾನರ್ ಅಳವಡಿಕೆ, ಜೆಸ್ಕಾಂ ಇಲಾಖೆಯಿಂದ ವಿದ್ಯುತ್ ಸಂಪರ್ಕ, ಅಗ್ನಿಶಾಮಕ ಇಲಾಖೆಯಿಂದ ಅಗ್ನಿ ಸುರಕ್ಷತಾ ಪ್ರಮಾಣ ಪತ್ರ, ಲೋಕೋಪಯೋಗಿ ಇಲಾಖೆಯಿಂದ ಪೆಂಡಾಲ್ ಸದೃಢತೆಯ ಪ್ರಮಾಣ ಪತ್ರ ಮತ್ತು ಧ್ವನಿವರ್ಧಕ ಬಳಕೆ, ಮೆರವಣಿಗೆಯ ಮಾರ್ಗ, ಸಮಯ ಹಾಗೂ ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳ ಪೊಲೀಸ್ ಅನುಮತಿಗಾಗಿ ತಾಲೂಕು ಮಟ್ಟದ ಏಕ ಗವಾಕ್ಷಿ ಸಮಿತಿಯ ರಚನೆ ಮಾಡಲಾಗಿದೆ.
ಪ್ರತಿ ವರ್ಷ ಸಂಘಟಕರು ವಿವಿಧ ಇಲಾಖೆಗಳಿಗೆ ಅಲೆಯುವುದನ್ನು ತಪ್ಪಿಸಲು ಮತ್ತು ಕೊನೆಯ ಕ್ಷಣದ ಗೊಂದಲಗಳನ್ನು ನಿವಾರಿಸಲು ಏಕ ಗವಾಕ್ಷಿ ಕ್ರಮ ಕೈಗೊಳ್ಳಲಾಗಿದೆ. ಈ ವ್ಯವಸ್ಥೆಯು ಈಗಾಗಲೇ ಎಲ್ಲಾ ತಾಲ್ಲೂಕು ಮಟ್ಟದ ಕಚೇರಿಗಳಲ್ಲಿ ಆರಂಭಿಸಲಾಗಿದ್ದು, ಸೆಪ್ಟೆಂಬರ್ 14 ರವರೆಗೆ ಕಾರ್ಯನಿರ್ವಹಿಸಲಿದೆ. ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳು ಹಾಗೂ ಸಂಘಟಕರು ತಾಲೂಕು ಕಚೇರಿಗಳಲ್ಲಿ ಸ್ಥಾಪಿಸಲಾಗಿರುವ ಈ ಏಕ ಗವಾಕ್ಷಿ ಕೇಂದ್ರವನ್ನು ಸಂಪರ್ಕಿಸಿ ಅಗತ್ಯ ಪರವಾನಗಿಗಳನ್ನು ನಿಯಮಾನುಸಾರ ಪಡೆದುಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a comment