ವಿಜಯನಗರ (ಹೊಸಪೇಟೆ) : ರಾಜ್ಯ ಸರ್ಕಾರ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯಾದ್ಯಂತ ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿಸಲಾಗುವುದು. ಅದರಂತೆ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಇಟಗಿ ಗ್ರಾಮದಲ್ಲಿ, ಕೂಡ್ಲಿಗಿ ತಾಲ್ಲೂಕಿನ ಚಂದ್ರಶೇಖರಪುರ, ಹರಪನಹಳ್ಳಿಯ ನಂದಿಬೇವೂರು ಹಾಗೂ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಉಪನಾಯಕನಹಳ್ಳಿಯಲ್ಲಿ ತಲಾ ಒಂದರಂತೆ ಒಟ್ಟು 4 ಖರೀದಿ ಕೇಂದ್ರ ಸ್ಥಾಪಿಸಲಾಗಿದ್ದು, ಕರ್ನಾಟಕ ಸಹಕಾರ ಎಣ್ಣೆ ಬೀಜ ಬೆಳೆಗಾರರ ಮಾರಾಟ ಮಹಾಮಂಡಳಿ ವತಿಯಿಂದ ಪ್ರತಿ ಕ್ವಿಂಟಾಲ್ ರೂ.7721 ರಂತೆ ಪ್ರತಿ ರೈತರಿಂದ ಎಕರೆಗೆ 4 ಕ್ವಿಂಟಾಲ್ ನಂತೆ ಗರಿಷ್ಠ 20 ಕ್ವಿಂಟಾಲ್ ಉತ್ಪನ್ನವನ್ನು ಖರೀದಿಸಲಾಗುತ್ತದೆ.
ಈಗಾಗಲೇ ನೊಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಪ್ರತಿದಿನ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಉತ್ಪನ್ನ ಖರೀದಿಸಲಾಗುತ್ತದೆ. ಬೆಂಬಲಬೆಲೆ ಯೋಜನೆಯಡಿ ಗುಣಮಟ್ಟದ ಸೂರ್ಯಕಾಂತಿ ಖರೀದಿಗೆ ಮತ್ತು ನೊಂದಣಿಗಾಗಿ ರೈತರು ಪ್ರಸಕ್ತ ಸಾಲಿನ ಪಹಣಿ, ಆಧಾರ ಕಾರ್ಡ್, ಬ್ಯಾಂಕ್ ಖಾತೆ ಪುಸ್ತಕ, ಎಫ್ಐಡಿ ದಾಖಲೆಗಳೊಂದಿಗೆ ಫ್ರೂಟ್ಸ್ ತಂತ್ರಾಂಶದಲ್ಲಿ ನೊಂದಾಯಿಸಿ ಕೊಳ್ಳಬಹುದಾಗಿದೆ. ಈ ಬಗ್ಗೆ ತಾಂತ್ರಿಕ ದೋಷಗಳಿದ್ದಲ್ಲಿ ಸಮೀಪದ ಕೃಷಿ ಇಲಾಖೆ ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಕೆ.ಎಸ್.ಎಫ್. ಅಧಿಕಾರಿ ರಾಘವೇಂದ್ರ ಮೊ.ಸಂ: 9591812123 ಗೆ ಸಂಪರ್ಕಿಸಬಹುದು. ಜಿಲ್ಲೆಯ ಎಲ್ಲಾ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಅಧ್ಯಕ್ಷರೂ ಆದ ಕವಿತಾ ಎಸ್. ಮನ್ನಿಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a comment